ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ವರುಣನ ಅಬ್ಬರಕ್ಕೆ ಕಾಂಪೌಂಡ್ ಗೋಡೆ ಕುಸಿದು ಏಳು ಜನ ಸಾವನ್ನಪ್ಪಿದ ದಾರುಣ ಘಟನೆ ಜೈತ್ಪುರದ ಹರಿನಗರದಲ್ಲಿ ನಡೆದಿದೆ.
ನಗರದ ಹಳೆಯ ದೇವಾಲಯ ಒಂದರ ಬಳಿಯ ಕೊಳಗೇರಿ ಪ್ರದೇಶದಲ್ಲಿ ಹಲವಾರು ಗುಜರಿ ವ್ಯಾಪಾರಿಗಳು ವಾಸಿಸುತ್ತಿದ್ದರು. ಈ ಪ್ರದೇಶದಲ್ಲಿದ್ದ ಗೋಡೆ ಭಾರೀ ಮಳೆಯ ಹೊಡೆತಕ್ಕೆ ಕುಸಿದಿದೆ. ಅವಶೇಷಗಳ ಅಡಿ 8 ಮಂದಿ ಸಿಲುಕಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಗಂಭಿರವಾಗಿ ಗಾಯಗೊಂಡಿದ್ದ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಐಶ್ವರ್ಯ ಶರ್ಮಾ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿಯಿಂದ ದೆಹಲಿಯಲ್ಲಿ ತೀವ್ರ ಮಳೆಯಾಗುತ್ತಿದೆ. ಇಂದು ಸಹ ಹೆಚ್ಚಿನ ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಿಸಲಾಗಿದೆ.