ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಬಳಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಏಳು ಜನ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮೀನಗಡದಿಂದ ಮಂಗಳೂರಿಗೆ ತೆರಳುತ್ತಿತ್ತು ಯಲ್ಲಾಪುರದ ಹಿಟ್ಟಿನಬೈಲ್ ಬಳಿ ಇಂಡಿಕೇಟರ್ ಹಾಕದೆ ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಅವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.
ಬಾದಾಮಿ ತಾಲೂಕು ಗುಳೆದಗುಡ್ಡ ನಿವಾಸಿ ನೀಲವ್ವ ಹರದೊಳ್ಳಿ ( 40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30)ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸುಮಾರು 45 ವರ್ಷದ ಇನ್ನೋರ್ವ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು ಇವರಿಗೆಲ್ಲರಿಗೂ ಯಲ್ಲಾಪುರ ತಾಲೂಕಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕೆತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.
ಸಿಪಿಐ ರಮೇಶ್ ಹಾನಾಪುರ,ಮಹಾವೀರ್ ಕಾಂಬಳೆ ಪಿಎ ಸ್ ಐ ಸಿದ್ದು ಗುಡಿ,ಪಿಎಸ್ ಐ ಯಲ್ಲಾಲಿಂಗ್ ಕುನ್ನೂರು ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಎಸ್ ಆರ್ ಟಿ ಸಿ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿ ಅಪಘಾತ ದ ಭೀಕರತೆಯನ್ನು ಸಾರುತ್ತದೆ. ಲಾರಿ ಹಾಗೂ ಬಸ್ ಚಾಲಕರ ವಿರುದ್ದ ಪ್ರಕರಣ ದಾಖಲಾಗಿದೆ.ಯಲ್ಲಾಪುರ ಪೊಲೀಸರು ತನಿಖೆ ನಡೆಸಿದ್ದಾರೆ.