ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಇದೀಗ ಪಕ್ಷದ ಪ್ರಣಾಳಿಕೆ ಹೇಗಿರಬೇಕು ಎಂಬುದರ ಕುರಿತು ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲು ಕಾಂಗ್ರೆಸ್ ಪಕ್ಷವು ಅಂತರ್ಜಾಲ ತಾಣ (awaazbharatki.in) ಮತ್ತು ಇ-ಮೇಲ್ ವಿಳಾಸವನ್ನು (awaazbharatki@inc.in) ಬುಧವಾರ ತೆರೆದಿದೆ.
ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪಿ.ಚಿದಂಬರಂ, ‘ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆ ಸಿದ್ಧಪಡಿಸಲು ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲಿದೆ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆಯು ‘ಜನರ ಪ್ರಣಾಳಿಕೆ’ಯಾಗಿರಲಿದೆ’ ಎಂದಿದ್ದಾರೆ.
‘ಪ್ರಣಾಳಿಕೆಯ ಸಿದ್ಧತೆಯಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕರೂ ಪಾಲ್ಗೊಳ್ಳಬೇಕು ಎಂಬುದು ನಮ್ಮ ಅಪೇಕ್ಷೆ. ಹಲವು ಸ್ತರಗಳಲ್ಲಿನ ಜನರು ಪಕ್ಷಕ್ಕೆ ಸೂಕ್ತ ಸಲಹೆಗಳನ್ನು ನೀಡುವ ಭರವಸೆ ಇದೆ. ಈ ‘ಜನ ಪ್ರಣಾಳಿಕೆ’ಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ.
‘ಪ್ರತಿ ರಾಜ್ಯದಲ್ಲೂ ಕನಿಷ್ಠ ಒಂದು ಸಮಾಲೋಚನಾ ಸಭೆ ನಡೆಸಲಾಗುವುದು. ಕೆಲವು ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಸಮಾವೇಶ ನಡೆಸಲಾಗುವುದು’ ಎಂದು ಚಿದಂಬರಂ ಹೇಳಿದ್ದಾರೆ.
